ಮಂಗಳೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ತಿಕ್ಕಾಟ ಹೆಚ್ಚಾಗಿದ್ದು, ಶಾಸಕರು ಅತಂತ್ರರಾಗಿದ್ದಾರೆ. ಅಂತಹ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಕದ ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇನ್ನು ಒಂದೂವರೆ ತಿಂಗಳಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಕುರಿತು ಮಾಹಿತಿ ಇದೆ ಎಂದು ಅವರು ಹೇಳಿದರು.
ಈ ಮಾಹಿತಿಯಿಂದ ವಿಚಲಿತರಾದ ಸಿದ್ದರಾಮಯ್ಯ ಅವರು, ತಾನು ಅಧಿಕಾರದಲ್ಲಿ ಉಳಿಯುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಡಿಯೂರಪ್ಪ ಮಂದಿನ 2.5 ವರ್ಷ ಅಧಿಕಾರ ಪೂರ್ಣಗೊಳಿಸಲಿದ್ದಾರೆ ಎಂದರು.
ಡಿಜೆ ಹಳ್ಳಿ ಗಲಭೆಯೇ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಆಂತರಿಕ ಜಗ್ಗಾಟಕ್ಕೆ ಸಾಕ್ಷಿ. ಅಖಂಡ ಶ್ರೀನೀವಾಸ ಅವರು ಸಿದ್ದರಾಮಯ್ಯ ಬೆಂಬಲಿಗರು. ಸಂಪತ್ ರಾಜ್ ಅವರು ಡಿ.ಕೆ.ಶಿವಕುಮಾರ್ ಬೆಂಬಲಿಗರು ಎಂದರು.
ಶಿರಾದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಸಿದ್ದರಾಮಯ್ಯ ಒಳೊಗಿಂದೊಳಗೆ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ ಎಂದರು.