ಬೆಂಗಳೂರು: ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಮತ್ತೊಮ್ಮೆ ಅವಿಶ್ವಾಸ ನೋಟಿಸ್ ಕಳುಹಿಸಿರುವ ಬೆನ್ನಲ್ಲೇ, ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳ ಆಯ್ಕೆ ಕುರಿತ ಚರ್ಚೆ ಆರಂಭವಾಗಿದೆ.
ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಜೆಡಿಎಸ್ ಜತೆ ಹೊಂದಾಣಿಕೆ ಅನಿವಾರ್ಯ ವಾಗಿದೆ. ಹೀಗಾಗಿ ಸಭಾಪತಿ ಸ್ಥಾನ ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಕೊಂಡಿದೆ ಎಂದು ಮೂಲಗಳು ಹೇಳಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸೋಮವಾರ ಹಾಸನ ವಿಮಾನ ನಿಲ್ದಾಣ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದು, ಆಗ ಸಭಾಪತಿ ವಿಚಾರವನ್ನೂ ಪ್ರಸ್ತಾಪ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದ್ದು, ಅರುಣ್ ಶಹಾಪುರ, ಶಶಿಲ್ ನಮೋಶಿ, ವೈ.ನಾರಾಯಣಸ್ವಾಮಿ, ಮಹಾಂತೇಶ ಕವಟಗಿಮಠ ಅವರ ಹೆಸರುಗಳು ಕೇಳಿಬಂದಿವೆ.
ಉಪಸಭಾಪತಿ ನೇಮಕವಾದ ಬಳಿಕ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಇದೇ 28 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅವಿಶ್ವಾಸ ನೋಟಿಸ್ ಎದುರಿಸಿ ಮುಜುಗರಕ್ಕೆ ಒಳಗಾಗುವ ಬದಲು ರಾಜಿನಾಮೆ ನೀಡುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.