ಬೆಂಗಳೂರು: ನಿನ್ನೆ ಬೆಳಗಾವಿಯಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ ಕಾಂಗ್ರೆಸ್ಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಎಷ್ಟು ಹಣ ನೀಡಿದ್ದಾರೆ ಎಂದು ಲೆಕ್ಕ ಕೊಡಲಿ ಅಂತಾ ಪ್ರಶ್ನಿಸಿದ್ದರು.
ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇಂದು ಸರಣಿ ಟ್ವೀಟ್ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ರಾಜ್ಯಕ್ಕೆ ಕೇಂದ್ರದಿಂದ ಹರಿದುಬಂದ ಹಣದ ಬಗ್ಗೆ ವಿವರ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು.. ಸುಳ್ಳನ್ನ ದೇವರು ಎಂದು ನಂಬಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು ಎಂದಿದ್ದಾರೆ.
- ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45, 713 ಕೋಟಿ. ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು.
- ಬಿಜೆಪಿ ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆ.
- 2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ. ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.
- ರಾಜ್ಯ ಬಜೆಟ್ ಪ್ರಕಾರ 2010-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ.
- ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆಯಾಗುತ್ತದೆ.
- ಜಿಎಸ್ ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನಂತೆ ಜಿಎಸ್ ಟಿ ಪರಿಹಾರದಲ್ಲಿ 25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ.
ಈ ನಷ್ಟಕ್ಕೆ ಯಾರು ಹೊಣೆ? - ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ.
- ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ. - ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ.
- ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು.
- ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ. ಇದು ಅಮಿತ್ ಶಾ ಅವರ ಗಮನಕ್ಕೆ ಬಂದಿಲ್ಲವೇ?
- ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ. ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು. ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ.